‘ನಿರ್ಲಕ್ಷ್ಯ ಮಾಡಿದ್ರೆ ಕ್ರಮ ಖಚಿತ’: ನಗರದಲ್ಲಿ ಸಚಿವ ಕೃಷ್ಣ ಬೈರೇಗೌಡ ದಿಢೀರ್ ತಪಾಸಣೆ, ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ!
ಶನಿವಾರ ಬೆಳಗ್ಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು, ಬಂಜಾರ ಲೇಔಟ್, ಅಗರ ಕೆರೆ, ಜಯಂತಿನಗರ, ರಾಮಮೂರ್ತಿನಗರ ಹಾಗೂ ಕಸ್ತೂರಿನಗರ ಸೇರಿದಂತೆ ಹಲವು ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು
ಬೆಂಗಳೂರು: ನಗರದ ನಾಗರಿಕ ಸೇವೆಗಳಲ್ಲಿ ನಿರ್ಲಕ್ಷ್ಯ ತೋರಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಬೆಳಗ್ಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವು, ಬಂಜಾರ ಲೇಔಟ್, ಅಗರ ಕೆರೆ, ಜಯಂತಿನಗರ, ರಾಮಮೂರ್ತಿನಗರ ಹಾಗೂ ಕಸ್ತೂರಿನಗರ ಸೇರಿದಂತೆ ಹಲವು ಪ್ರದೇಶಗಳಿಗೆ ದಿಢೀರ್ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು.
ಈ ವೇಳೆ ಸ್ವಚ್ಛತೆ, ಕಸ ವಿಲೇವಾರಿ, ಪೌರಕಾರ್ಮಿಕರ ಕಾರ್ಯನಿರ್ವಹಣೆ, ರಸ್ತೆ ಹಾಗೂ ಫುಟ್ಪಾತ್ಗಳ ನಿರ್ವಹಣೆ, ರಾಜಕಾಲುವೆಗಳ ಸ್ವಚ್ಛತೆ, ಕೆರೆಗಳ ನಿರ್ವಹಣೆ, ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿಗಳು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಮೂಲಭೂತ ನಾಗರಿಕ ಸೇವೆಗಳು ನೆಲಮಟ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ತೊಂದರೆ ಅಥವಾ ಸುರಕ್ಷತಾ ಸಮಸ್ಯೆ ಉಂಟಾಗಬಾರದು ಎಂದು ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

